ಕೆ.ಜಿ.ಹಳ್ಳಿಯಲ್ಲಿರುವ ಮನೆ ಹಾಗೂ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಮೂವರು ಆರೋಪಿಗಳನ್ನು ರಕ್ಷಣೆ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಗಲಭೆಯಲ್ಲಿ ಬಂಧಿತರಾಗಿರುವವರು ಅಮಾಯಕ ಯುವಕ ಹಾಗೂ ವಿದ್ಯಾರ್ಥಿಗಳು ಎಂದು ಅವರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ಪತ್ರ ಬರೆದಿದ್ದು, ಇದಕ್ಕೆ ಗೃಹ ಸಚಿವ ಪರಮೇಶ್ವರ್ ಸ್ಪಂದಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಿಡುಗಡೆ ಮಾಡಲು ಮುಂದಾಗಿದೆ ಎಂಬ ಅನುಮಾನಗಳು ಕಂಡುಬರುತ್ತಿವೆ. ಇದಕ್ಕೆ ಪೂರಕ ಎಂಬಂತೆ ಮೈಸೂರು ಜಿಲ್ಲೆಯ ಶಾಸಕ ತನ್ವೀರ್ ಸೇಠ್ ಅವರು ಸರ್ಕಾರಕ್ಕೆ ಪತ್ರ ಬರೆದು ಈ ಹಿಂಸಾಚಾರ ಪ್ರಕರಣಗಳಲ್ಲಿ ದಾಖಲಾದ ಮೊಕದ್ದಮೆಗಳನ್ನು ಮರು ಪರಿಶೀಲಿಸಿ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳನ್ನು ಕಾನೂನಾತ್ಮಕ ಕ್ರಮದಡಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ಪ್ರಕ್ರಿಯೆ ಈಗ ಸರ್ಕಾರದಲ್ಲಿ ಆರಂಭವಾಗಿದ್ದು ಸಚಿವ ಸಂಪುಟದ ಉಪಸಮಿತಿಯಲ್ಲಿ ಚರ್ಚೆ ಮಾಡಿ ಅದನ್ನು ಸಚಿವ ಸಂಪುಟದ ಮುಂದಿಟ್ಟು ತೀರ್ಮಾನ ಕೈಗೊಳ್ಳಲಾಗುತ್ತದೆ.
ಕರ್ನಾಟಕದ ವಿವಿಧೆಡೆ ಪ್ರತಿಭಟನೆ, ಗಲಭೆ ಪ್ರಕರಣಗಳಲ್ಲಿ ಬಂಧಿತರಾಗಿರುವ ಯುವಕರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕೇಸ್ಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ , ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಗೆ ಪತ್ರ ಬರೆದಿದ್ದಾರೆ. ಸುಳ್ಳು ಮೊಕದ್ದಮೆಗಳಲ್ಲಿ ಯುವಕರು, ವಿದ್ಯಾರ್ಥಿಗಳು ಬಂಧಿತರಾಗಿದ್ದಾರೆ. ಹೀಗಾಗಿ ಪ್ರಕರಣಗಳನ್ನು ಮರು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯುವಂತೆ ಮೈಸೂರಿನ ಎನ್.ಆರ್.ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. ತನ್ವೀರ್ ಸೇಠ್ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪತ್ರ ಬರೆದಿದ್ದಾರೆ.
Comments
0 comment