ಉಡುಪಿ: ಪ್ಯಾರಾ ಮೆಡಿಕಲ್ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಘಟನೆ ಸಂಬಂಧಿಸಿದಂತೆ ಇಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದ್ದು , ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ಮಧ್ಯೆ ನೂಕಾಟ, ತಳ್ಳಾಟ ನಡೆಯಿತು. ಸ್ಥಳಕ್ಕೆ ಎಸ್ಪಿ ಬರಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು.
ಮುಸ್ಲಿಂ ಯುವತಿಯರ ಹೇಯ ಕೃತ್ಯವನ್ನು ಖಂಡಿಸಿ ಹಾಗೂ ತನಿಖೆಯ ದಾರಿ ತಪ್ಪಿಸುತ್ತಿರುವ ಪೊಲೀಸ್ ಇಲಾಖೆ ಹಾಗೂ ಸರ್ಕಾರದ ನಡೆಯ ವಿರುದ್ಧ ಎಬಿವಿಪಿ ಪ್ರತಿಭಟನೆ ಎಂದು ತಿಳಿಸಿದ್ಧಾರೆ.
ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿಗೆ ಪುರಭವನ ಕಡೆಯಿಂದ ಘೋಷಣೆ ಕೂಗುತ್ತಾ ನಡೆದು ಬಂದ ವಿದ್ಯಾರ್ಥಿಗಳು ಒಂದಿಷ್ಟು ಹೊತ್ತು ಪ್ರತಿಭಟನೆ ನಡೆಸಿದರು. ಬಳಿಕ ವಿದ್ಯಾರ್ಥಿಗಳಿಗೆ ಸುಳ್ಳು ಹೇಳಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು. ರಸ್ತೆಗೆ ಮುನ್ನುಗ್ಗಿದಾಗ ವಿದ್ಯಾರ್ಥಿಗಳನ್ನು ಪೊಲೀಸರು ತಳ್ಳಿದರು. ರಸ್ತೆಯಿಂದಾಚೆ ಕೂತ ವಿದ್ಯಾರ್ಥಿಗಳು ಮತ್ತೆ ಎಸ್ಪಿ, ಪೊಲೀಸರು, ರಾಜ್ಯ ಸರಕಾರಕ್ಕೆ ಧಿಕ್ಕಾರ ಕೂಗಿದರು.
ಸಂತ್ರಸ್ತೆ ವಿಧ್ಯಾರ್ಥಿನಿಗೆ ನ್ಯಾಯ ಒದಗಿಸಿ ಕೊಡಬೇಕು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಯಬೇಕು ಎನ್ನುವ ಆಗ್ರಹ ಪ್ರತಿಭಟನಕಾರರಿಂದ ಕೇಳಿಬಂತು. ಸುರಿಯುತ್ತಿರುವ ಮಳೆಯಲ್ಲೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರುವಂತೆ ಪಟ್ಟುಹಿಡಿದರು.ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.
ಬಳಿಕ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರರವರು ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ, ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
Comments
0 comment